ಹಾಸನ: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿವೆ. ಆದರೆ, ಈ ಮೈತ್ರಿಯಲ್ಲಿ ಬಿರುಕು ಕಂಡು ಬಂದಿದೆ.
ಹಾಸನದಲ್ಲಿ ಮೈತ್ರಿಗೆ ಬಂಡಾಯದ ಬಿಸಿ ತಟ್ಟಿದೆ. ಮೈತ್ರಿ ಅಭ್ಯರ್ಥಿಯೆಂದು ಜೆಡಿಎಸ್ ಪಕ್ಷದ, ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಜೆಡಿಎಸ್ ಪ್ರಚಾರ ನಡೆಸುತ್ತಿದೆ. ಮೈತ್ರಿ ಅಭ್ಯರ್ಥಿ ಅಂತಿಮವಾಗಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡರ ಅತ್ಯಾಪ್ತ ಎಚ್ಪಿ ಕಿರಣ್ ಕುಮಾರ್ ಕೂಡ ಪ್ರಚಾರ ಆರಂಭಿಸಿದ್ದಾರೆ. ಇದರಿಂದಾಗಿ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಜಗಳ ಬೀದಿಗೆ ಬಂದಂತಾಗಿದೆ.
ಈ ಮೂಲಕ ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ತಂಡ ಮುಂದಾಗಿದೆ. ಜೆಡಿಎಸ್ ಅಭ್ಯರ್ಥಿಗೆ ಪರ್ಯಾಯವಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಯನ್ನೇ ಅಖಾಡಕ್ಕೆ ಇಳಿಸಿದೆ. ಜಿಲ್ಲಾಮಟ್ಟದಲ್ಲಿ ಮೈತ್ರಿ ಮಾತುಕತೆ ನಡೆಯದ ಹಿನ್ನೆಲೆಯಲ್ಲಿ ಪ್ರಚಾರ ಆರಂಭಿಸಲಾಗಿದೆ ಎಂದು ಹೇಳಲಾಗುತ್ತಿದೆ. ನಾಮಪತ್ರ ಅರ್ಜಿಗೆ ಪೂಜೆ ಸಲ್ಲಿಸಿ ಕಿರಣ್ ಕುಮಾರ್ ಪ್ರಚಾರ ಆರಂಬಿಸಿದ್ದಾರೆ.
ಕಿರಣ್ ಕುಮಾರ್ ಹಾಸನದ ಸಿದ್ದೇಶ್ವರ ದೇವಾಲಯ ದಲ್ಲಿ ಪೂಜೆ ಸಲ್ಲಿಸಿದ್ದಾರೆ. ಇದು ಜೆಡಿಎಸ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಜಿಲ್ಲೆಯ ಪ್ರಬಾವಿ ನಾಯಕ ಪ್ರೀತಂಗೌಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೆಡಿಎಸ್ ಸಂಸದ ಪ್ರಜ್ವಲ್ ಪ್ರಚಾರ ಶುರುಮಾಡಿರುವುದೇ ಈ ಎಲ್ಲ ಬೆಳವಣಿಗೆಗೆ ಕಾರಣ ಎಂಬ ಮಾತು ಕೇಳಿ ಬರುತ್ತಿದೆ.
ಮೈತ್ರಿ ಅಭ್ಯರ್ಥಿ ಇನ್ನೂ ಘೋಷಣೆ ಆಗಿಲ್ಲ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ ತಮ್ಮ ಪ್ರಚಾರ ಆರಂಭಿಸಿದ್ದಾರೆ. ಬಿಜೆಪಿಯ ಈ ನಡೆ ತೀವ್ರ ಕುತೂಹಲ ಮೂಡಿಸಿದೆ. ಈ ವಿಚಾರದಲ್ಲಿ ಬಿಜೆಪಿ ರಾಜ್ಯ ನಾಯಕರು ಮಧ್ಯಪ್ರವೇಶಿಸಿ ಮೈತ್ರಿ ಮುನಿಸನ್ನು ಶಮನಗೊಳಿಸುತ್ತಾರೆಯೋ ಅಥವಾ ಇದು ಹೀಗೆಯೇ ಮುಂದುವರೆಯಲಿದೆಯೇ ಎಂಬುವುದನ್ನು ಕಾಯ್ದು ನೋಡೇಬೇಕಿದೆ.