ಬೆಂಗಳೂರು: ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ಮಂದಿ ಪ್ರಾಣ ಕಳೆದುಕೊಂಡಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಇಡೀ ದೇಶವೇ ಆಕ್ರೋಶ ವ್ಯಕ್ತಪಡಿಸುತ್ತಿದೆ.
ಈ ದಾಳಿ ನಡೆಸಿದ ಶಂಕಿತ ಉಗ್ರರ ರೇಖಾಚಿತ್ರಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಹಂಚಿಕೊಂಡಿದ್ದು, ಉಗ್ರರ ಕುರಿತು ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಈ ಕುರಿತು ಸಾರ್ವಜನಿಕರಿಗೆ ಮನವಿ ಮಾಡಿರುವ ಪೊಲೀಸರು, ಮಾಹಿತಿದಾರರ, ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಯಾವುದೇ ಸಂಬಂಧಿತ ಮಾಹಿತಿಯನ್ನು ಹೊಂದಿರುವ ನಾಗರಿಕರು ಅನಂತ್ನಾಗ್ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಪೊಲೀಸ್ ನಿಯಂತ್ರಣ ಕೊಠಡಿ ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ಸಂಪರ್ಕಿಸಲು ಕೋರಲಾಗಿದೆ: ಎಸ್ಎಸ್ಪಿ ಅನಂತನಾಗ್ : 9596777666, ಪಿಸಿಆರ್ ಅನಂತನಾಗ್ : 9596777669 ಇ- ಮೇಲ್ : dpoanantnag-jk@nic.in ಮಾಹಿತಿ ನೀಡಬಹುದಾಗಿದೆ.