ಬೆಂಗಳೂರು: ಮತ್ತೊಮ್ಮೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಏ. 24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಬಾರಿಯ ಸಭೆಯಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿನ ಯೋಜನೆಗಳಿಗೆ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗುವ ಸಾಧ್ಯತೆ ಇದೆ.
ಕ್ಯಾಬಿನೆಟ್ ಸಭೆ ನಡೆಸುವ ಕುರಿತು ಈಗಾಗಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏ. 24ರಂದು ಗುರುವಾರ ಮಧ್ಯಾಹ್ನ 12ಕ್ಕೆ ಸಚಿವ ಸಂಪುಟದ 2025ನೇ ಸಾಲಿನ 9ನೇ ಸಭೆಯನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೈ ಮಹದೇಶ್ವರ ಬೆಟ್ಟದಲ್ಲಿ ಕರೆಯಲಾಗಿದೆ.
ಈ ಸಚಿವ ಸಂಪುಟ ಸಭೆಯಲ್ಲಿ ಮೈಸೂರು ಕಂದಾಯ ವಿಭಾಗಕ್ಕೆ ಸೇರಿದ ಜಿಲ್ಲೆಗಳ ಪ್ರಸ್ತಾವನೆಗಳಿಗೆ 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದ ಯೋಜನೆಗಳೂ ಸೇರಿದಂತೆ ಹಲವು ವಿಷಯಗಳಿಗೆ ಆದ್ಯತೆ ನೀಡಲಾಗುವುದು ಎಂದು ಸರ್ಕಾರದ ಸಚಿವ ಸಂಪುಟದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.