ಬೆಂಗಳೂರು: ಚಂದನವನದ ಹಿರಿಯ ನಟ ಬ್ಯಾಂಕ್ ಜನಾರ್ಧನ್(76) ವಿಧಿವಶರಾಗಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಗರದ ಖಾಸಗಿ ಆಸ್ಪತ್ರೆಯಯಲ್ಲಿ ಕೊನೆಯ ಉಸಿರು ಚೆಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಎಂದು ತಿಳಿದು ಬಂದಿದೆ.
ಬ್ಯಾಂಕ್ ಜನಾರ್ಧನ್ ಮಧ್ಯರಾತ್ರಿ ನಿಧನರಾಗಿದ್ದಾರೆ. ನಗರದ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ. 1949ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. 2016ರಿಂದ ಅವರು ಚಿತ್ರರಂಗದಲ್ಲಿ ಅಷ್ಟೊಂದು ಗುರುತಿಸಿಕೊಂಡಿರಲಿಲ್ಲ. 2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ನಟಿಸಿದ್ದರು.
ಜನಾರ್ಧನ್, ಚಿತ್ರದುರ್ಗದ ಸಮೀಪದ ಹೊಳಲ್ಕೆರೆ ಹತ್ತಿರ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಕಲೆ ಅವರಿಗೆ ಆಸಕ್ತಿಯ ವಿಷಯವಾಗಿತ್ತು. ಕೆಲಸದೊಂದಿಗೆ ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದರು. ಅವರ ನಾಟಕವನ್ನು ನೋಡಿ ಧೀರೇಂದ್ರ ಗೋಪಾಲ್ ಅವರು ಬೆಂಗಳೂರಿಗೆ ಬರುವಂತೆ ಹೇಳಿ, ಅವರಿಗೆ ಅವಕಾಶ ಕೊಡಿಸಿದ್ದರು.
ಊರಿಗೆ ಉಪಕಾರಿ’ ಸಿನಿಮಾದಲ್ಲಿ ವಜ್ರಮುನಿ ಬಾಡಿಗಾರ್ಡ್ ಪಾತ್ರ ಮಾಡಿದರು. ವಿಷ್ಣುವರ್ಧನ್ ಅವರು ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಇದ್ದರು. ಅಂದಿನಿಂದ ಇಲ್ಲಿಯವರೆಗೆ ಜನಾರ್ಧನ್ ಕನ್ನಡಿಗರ ಮನ ಗೆದ್ದಿದ್ದಾರೆ. ಇಲ್ಲಿಯವರೆಗೂ ಸುಮಾರು 800ಕ್ಕೂ ಅಧಿಕ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ಕಲಾವಿದನನ್ನು ಕಳೆದುಕೊಂಡು ಸ್ಯಾಂಡಲ್ ವುಡ್ ಮತ್ತೊಮ್ಮೆ ಅನಾಥವಾಗಿದೆ. ಇಡೀ ಚಂದನವನ ಇಂದು ಕಣ್ಣೀರು ಸುರಿಸುತ್ತಿದೆ.