ಬೆಂಗಳೂರು: ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಿಗೆ ಇಂದು ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ರಾಜ್ಯ ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಈಗಾಗಲೇ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇಂದು ನೂತನ ಜಿಲ್ಲಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಯೋಜಿಸಿದ್ದಾರೆ. ಇಂದು ಬೆಳಗ್ಗೆ ಈ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ 39 ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಭಾಗಿಯಾಗಲಿದ್ದಾರೆ. ಬೆಂಗಳೂರಿನ ಬಿಜೆಪಿ ಪ್ರದಾನ ಕಚೇರಿ ಜಗನ್ನಾಥ ಭವನದಲ್ಲಿ ಅಬಿನಂದನಾ ಕಾರ್ಯಕ್ರಮ ನಡೆಯಲಿದೆ. ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಅಭಿನಂದನಾ ಕಾರ್ಯಕ್ರಮದ ಬಳಿಕ ಜಿಲ್ಲಾಧ್ಯಕ್ಷರ ಜೊತೆಗೆ ಬಿ.ವೈ.ವಿಜಯೇಂದ್ರ ಸಭೆ ನಡೆಸಲಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಪಕ್ಷ ಸಂಘಟನೆ ಹೇಗೆ ನಡೆಯಬೇಕು? ಸರ್ಕಾರದ ವಿರುದ್ಧ ಹೋರಾಟ ಹೇಗಿರಬೇಕು? ಮುಂದೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಬಲವರ್ಧನೆ ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ವಿಜಯೇಂದ್ರ ಸಭೆ ನಡೆಸಲಿದ್ದಾರೆ.