ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕೆಲಸಗಳಿಗೆ ಕಾಯಕಲ್ಪ ನೀಡಲು ಹಾಗೂ ಇಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕಾರ್ಯಪ್ರವೃತ್ತವಾಗಿದ್ದು, ಈ ಕುರಿತು ಮುಂದಿನ ತಿಂಗಳು ವ್ಯವಸ್ಥಾಪನಾ ಸಮಿತಿ, ಶಾಸಕರು, ಮಾಜಿ ಶಾಸಕರು, ಅಧಿಕಾರಿಗಳು ಹಾಗೂ ಪ್ರಮುಖರ ಸಭೆಯನ್ನು ಬೆಂಗಳೂರಿನಲ್ಲಿ ಕರೆಯಲಾಗಿದೆ ಎಂದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ಕ್ಷೇತ್ರದ ಒಳ ವ್ಯಾಪ್ತಿಯಲ್ಲಿ ಇರುವ ಖಾಸಗಿ ಪಾರ್ಕಿಂಗ್ ವ್ಯವಸ್ಥೆಗೆ ನಿರ್ಬಂಧ ಹಾಕಬೇಕು. ಒತ್ತುವರಿ ಆಗಿರುವ ದೇಗುಲದ ಭೂಮಿಗಳನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಬಡ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ದೊರಕಲು ಅನುಕೂಲವಾಗುವಂತೆ ದೇವಸ್ಥಾನದ ವತಿಯಿಂದ ವೈದ್ಯಕೀಯ ಕಾಲೇಜು ಆರಂಭಿಸಬೇಕೆಂದು ಅಭಿಪ್ರಾಯ ಹೇಳಿದರು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಇಲ್ಲಿನ ಪಾರ್ಕಿಂಗ್ ಅವ್ಯವಸ್ಥೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಶಾಶ್ವತ ಕ್ರಮವಾಗಬೇಕು. ಕೊಲ್ಲೂರಿನಲ್ಲಿ ಸುಸಜ್ಜಿತ ಸಾಂಸ್ಕೃತಿಕ ಭವನ ನಿರ್ಮಾಣವಾಗಬೇಕು ಎಂದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ ಮಾತನಾಡಿ, ದೇವಸ್ಥಾನದ ವತಿಯಿಂದ ನಡೆಯುವ ಐದು ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅವಕಾಶ ನೀಡಬೇಕು. ಪಾರ್ಕಿಂಗ್ ವ್ಯವಸ್ಥೆಗಾಗಿ ಶುಕ್ಲತೀರ್ಥ ಬಳಿಯಲ್ಲಿ ಗುರುತಿಸಲಾದ 3.5 ಎಕರೆ ಕಂದಾಯ ಭೂಮಿಯನ್ನು ದೇವಸ್ಥಾನಕ್ಕೆ ನೀಡುವ ಕುರಿತು ಕಂದಾಯ ಇಲಾಖೆ ಶೀಘ್ರ ತೀರ್ಮಾನ ಕೈಗೊಳ್ಳಬೇಕು.
ಸ್ವಚ್ಚತೆ ಹಾಗೂ ಇತರ ಮೂಲಭೂತ ಕಾರ್ಯಗಳ ಅನುಕೂಲಕ್ಕಾಗಿ ಹೊರ ಗುತ್ತಿಗೆ ನೌಕರರ ನೇಮಕಾತಿಗೆ ಅನುಮತಿ ನೀಡಬೇಕು. ಆನೆ ಬಾಗಿಲಿನಲ್ಲಿ ಶಿಲಾಮಯ ಸ್ವಾಗತ ಕಮಾನು ನಿರ್ಮಾಣ ಯೋಜನೆ ಇದೆ. 2 ಕೋಟಿ ರೂ. ವೆಚ್ಚದಲ್ಲಿ ಲಲಿತಾಂಬಿಕಾ ವಸತಿಗ್ರಹದ ನವೀಕರಣ, ವಿದ್ಯಾರ್ಥಿಗಳ ಹಾಸ್ಟೆಲ್ ಅಭಿವೃದ್ಧಿ ಹಾಗೂ ಸ್ವರ್ಣಮುಖಿ ಮಂಟಪದ ನವೀಕರಣ ಗುರಿಗಳನ್ನು ಇರಿಸಿಕೊಳ್ಳಲಾಗಿದೆ ಎಂದರು.
ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯ ರಘುರಾಮ ದೇವಾಡಿಗ ಆಲೂರು, ಮಹಾಲಿಂಗ ನಾಯ್ಕ್, ಕೆ.ಸುಧಾ ಬೈಂದೂರು, ಮಾಜಿ ಸಚಿವ ಅಭಯಚಂದ್ರ ಜೈನ್, ಮಂಗಳೂರು ಮಹಾನಗರಪಾಲಿಕೆ ಮಾಜಿ ಮೇಯರ್ ಭಾಸ್ಕರ್ ಮೊಯಿಲಿ, ರಾಜ್ಯ ಧಾರ್ಮಿಕ ಪರಿಷತ್ ಮಲ್ಲಿಕಾ ಪಕ್ಕಳಾ ಬಂಟ್ವಾಳ, ಉದ್ಯಮಿ ಶಂಕರ ಶೆಟ್ಟಿ ಬೆಂಗಳೂರು, ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯಕುಮಾರ ಶೆಟ್ಟಿ ಮುನಿಯಾಲ್, ಪ್ರಸಾದ್ ರಾಜ್ ಕಾಂಚನ್, ರಾಜು ಎಸ್ ಪೂಜಾರಿ ಬೈಂದೂರು, ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಪ್ರದೀಪ್ಕುಮಾರ ಶೆಟ್ಟಿ ಗುಡಿಬೆಟ್ಟು, ಅರವಿಂದ್ ಪೂಜಾರಿ, ಕಿರಣ್ ಹೆಗ್ಡೆ ಅಂಪಾರು, ಮೋಹನ್ ಪೂಜಾರಿ ಉಪ್ಪುಂದ, ಅಣ್ಣಪ್ಪ ಶೆಟ್ಟಿ ಕಾಲ್ತೋಡು, ಜಗದೀಶ್ ದೇವಾಡಿಗ ಉಪಸ್ಥಿತರಿದ್ದರು.