ಬೀದರ್: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹಲವೆಡೆ ಜನ – ಜೀವನ ಅಸ್ತವ್ಯಸ್ಥಗೊಂಡಿದೆ. ಆದರೆ, ಬೀದರ್ ಜಿಲ್ಲೆಯಲ್ಲಿ ಮಾತ್ರ ಮಳೆಯಾಗುತ್ತಿಲ್ಲ. ಇದರಿಂದಾಗಿ ರೈತರು ಹೈರಾಣಾಗಿದ್ದಾರೆ.
ಮಳೆ ಇಲ್ಲದೇ ಅನ್ನದಾತ ಚಿಂತಾಕ್ರಾಂತನಾಗಿದ್ದಾನೆ. ಮಳೆ ಬಾರದ ಹಿನ್ನೆಲೆಯಲ್ಲಿ ರೈತರು ಹೊಲದಲ್ಲಿ ಬೆಳೆದ ಸೋಯಾ, ತೊಗರಿ ಸೇರಿದಂತೆ ಹಲವು ಬೆಳೆಗಳನ್ನು ಹರಗಿ ನಾಶ ಮಾಡಿದ್ದಾರೆ.
ಭಾಲ್ಕಿ ತಾಲೂಕಿನ ನೀಲಮನಳ್ಳಿ ಗ್ರಾಮದ ಸಂತೋಷ್ ಶಡೋಳೆ ಎಂಬ ರೈತರು ಕಳೆದ 15 ದಿನಗಳ ಹಿಂದೆ ಎರಡು ಎಕರೆ ಪ್ರದೇಶದಲ್ಲಿ ಸೋಯಾ, ತೊಗರಿ ಬೆಳೆ ಬಿತ್ತನೆ ಮಾಡಿದ್ದರು. ಆದರೆ, ಸಕಾಲಕ್ಕೆ ಮಳೆಯಾಗದ ಹಿನ್ನೆಲೆಯಲ್ಲಿ ತೇವಾಂಶ ಕಡಿಮೆಯಾಗಿ ಬೆಳೆ ಒಣಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿತ್ತಿದ ಬೆಳೆಯನ್ನು ನಾಶ ಮಾಡಿದ್ದಾರೆ. ಪ್ರತಿ ಎಕರೆಗೆ 10 ಸಾವಿರಕ್ಕೂ ಅಧಿಕ ಹಣ ಖರ್ಚು ಮಾಡಿ ಈಗ ರೈತ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರವು ಪರಿಹಾರ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.