ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ರನ್ನು ಅನರ್ಹಗಗೊಳಿಸಿರುವ ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಗದ್ದಲ ಸೃಷ್ಟಿಸಿದ್ದಾರೆ. ಹೀಗಾಗಿ ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಸದನದಿಂದ ಹೊರ ಹೊಗುವಂತಾಗಿದೆ.
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 50 ಕೆಜಿ ಫೈನಲ್ ಪಂದ್ಯಕ್ಕೂ ಮುನ್ನ ಕೇವಲ 100 ಗ್ರಾಂ ತೂಕ ಹೆಚ್ಚಾಗಿದೆ ಎಂಬ ಕಾರಣಕ್ಕೆ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ನ್ಯಾಯಕ್ಕಾಗಿ ಒತ್ತಾಯಿಸಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಿದರು. ಚರ್ಚೆಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದರು. ಆಗ ರಾಜ್ಯಸಭಾ ಸ್ಪೀಕರ್ ಧಂಖರ್ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿಪಕ್ಷ ಸದಸ್ಯರ ನಡವಳಿಕೆ ಟೀಕಿಸಿ, ಹೊರ ನಡೆದರು.
ಇದಕ್ಕೂ ಮುನ್ನ, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರೇನ್ ಅವರ ವರ್ತನೆಯನ್ನು ಧಂಖರ್ ಖಂಡಿಸಿದ್ದರು. ವಿನೇಶ್ ಫೋಗಟ್ ಅವರೊಂದಿಗೆ ಇಡೀ ದೇಶ ನಿಂತಿದೆ ಎಂದು ಕೇಂದ್ರ ಸಚಿವ ಜೆಪಿ ನಡ್ಡಾ ಹೇಳಿದರು. ನಿನ್ನೆಯಷ್ಟೇ ಪ್ರಧಾನಿ ಮೋದಿ ಅವರು ವಿನೇಶ್ ಅವರನ್ನು ಚಾಂಪಿಯನ್ ಆಫ್ ಚಾಂಪಿಯನ್ಸ್ ಎಂದು ಕರೆದಿದ್ದು, ಪ್ರಧಾನಿಯವರ ಧ್ವನಿ 140 ಕೋಟಿ ಜನರ ಧ್ವನಿಯಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ವಿಪಕ್ಷಗಳು ಪಟ್ಟು ಹಿಡಿದಿದ್ದಕ್ಕೆ ಸ್ಪೀಕರ್ ಬೇಸರ ವ್ಯಕ್ತಪಡಿಸಿದರು.