ಶಿವಮೊಗ್ಗ: ತಂದೆಯಿಂದ ಮಗಳ ಮೇಲೆ ಹಲ್ಲೆ ಮತ್ತು ಕೊಲೆಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರ ಬಿದ್ದಿದೆ.
ಹಲ್ಲೆಗೊಳಗಾದ ಯುವತಿ ಮದುವೆಗೂ ಮುನ್ನವೇ ಗರ್ಭಿಣಿಯಾಗಿರುವ ಆರೋಪ ಕೇಳಿ ಬಂದಿದೆ. ಹಲ್ಲೆಗೊಳಗಾದ ಪುತ್ರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಂದೆಯ ವಿರುದ್ಧ ಕೊಲೆ ಯತ್ನ ಹಾಗೂ ಹಲ್ಲೆ ಆರೋಪದಡಿ ಕೇಸ್ ದಾಖಲಾಗಿದೆ. ಸೊರಬ ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮದುವೆಗೆ ಮೊದಲೇ ಪುತ್ರಿ ಗರ್ಭಿಣಿ ಆಗಿದ್ದರಿಂದ ನೊಂದು ತಂದೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ಕರೆದೊಯ್ಯುವುದಾಗಿ ಹೇಳಿ ಪತ್ನಿ, ಪುತ್ರಿ ಜೊತೆ ತಂದೆ ಹೊರಟಿದ್ದರು. ನಂತರ ಉಳವಿ ಸಮೀಪದ ಕಾನಳ್ಳಿ ಬಳಿಯ ಕಣ್ಣೂರು ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಹಲ್ಲೆಯಿಂದ ಪ್ರಜ್ಞೆ ತಪ್ಪಿ ಬಿದ್ದ ಮಗಳನ್ನು ಅಲ್ಲೇ ಬಿಟ್ಟು ಪೋಷಕರು ಹೋಗಿದ್ದಾರೆ. ಕೆಲವು ಸಮಯದ ಬಳಿಕ ಮಗಳು ಎಚ್ಚೆತ್ತಿದ್ದಾಳೆ. ನಂತರ ಸ್ಥಳೀಯರ ಸಹಕಾರದಿಂದ ಉಳವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ವೇಳೆ ಮಗಳ ಆರೋಪವನ್ನು ಪೋಷಕರು ನಿರಾಕರಿಸಿದ್ದಾರೆ. ಮಗಳ ಮಾನಸಿಕತೆ ಸರಿಯಿಲ್ಲದ ಕಾರಣ ಸುಳ್ಳು ಆರೋಪ ಮಾಡುತ್ತಿದ್ದಾಳೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸೊರಬ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.