ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. ಇವತ್ತಿನ ದಿಶಾ ಸಭೆಯಲ್ಲಿ ಮಾತನಾಡಿದ ಅವರು 5300 ಕೋಟಿ ರೂಪಾಯಿ ಭದ್ರಾ ಮೇಲ್ದಂಡೆ ಯೋಜನೆಗೆ ಕೊಡುವುದಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದರೂ ನಯಾಪೈಸೆ ಬಿಡುಗಡೆ ಮಾಡಿಲ್ಲ.
ರಾಜ್ಯದ ಸಂಸದರು, ರಾಜ್ಯ ಸಭಾ ಸದಸ್ಯರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬಾರದು, ಎರಡು ವರ್ಷದಲ್ಲಿ ಒಮ್ಮೆಯೂ ರಾಜ್ಯದ ಪರವಾಗಿ ಸಂಸದರು ಮಾತಾಡಲಿಲ್ಲವಲ್ಲ ಯಾಕೆ ಎಂದು ದಿಶಾ ಸಭೆಯಲ್ಲಿದ್ದ ಬಿಜೆಪಿ ರಾಜ್ಯಸಭೆ ಸದಸ್ಯರು, ಶಾಸಕರು ಹಾಗೂ ಪರಿಷತ್ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ ಆದರೂ ಕೂಡ ಚೂರು, ಪಾರು ಹಣವು ಕೇಂದ್ರದಿಂದ ಬರುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ , ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರ್ಕಾರದಿಂದ ಮೇಲಿಂದ ಮೇಲೆ ಬರೆದಿರುವ ಪತ್ರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಆದ್ರೆ ಕೆಂದರದಿಂದ ರಾಜ್ಯಕ್ಕೆ ಏನನ್ನು ಕೊಟ್ಟಿಲ್ಲ. ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ, ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾಡಿ ಮಾತಾಡ್ತೀರಾ..? ನಾನೇ ಎರಡು ಬಾರಿ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ರು ಯಾವುದೇ ಹಣ ಬಿಡುಗಡೆ ಮಾಡಿಲ್ಲ.
ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟೊತ್ತಿಗೆ ನೀವು ಈಗಾಗಲೇ ರಾಜ್ಯಕ್ಕೆ ಅನುದಾನ ಕೊಡಿಸಬೇಕಿತ್ತು ಆದ್ರೆ ನೀವು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿದ್ದಿರಾ..? ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಎಂದು ಅಸಮಧಾನ ಹೊರಹಾಕಿದರು.