ಬೆಂಗಳೂರು: ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಹೊಂದಾಣಿಕೆ ಇಲ್ಲ ಎಂಬ ಮಾತು ಕೇಳಿ ಬರುತ್ತಿದ್ದು, ಹೈಕಮಾಂಡ್ ವರದಿ ಕೇಳಿದೆ.
ರಾಜ್ಯದಲ್ಲಿ ಮೈತ್ರಿ ಹೊಂದಾಣಿಕೆ ಇಲ್ಲ ಎಂದು ಕೇಳಿ ಬರುತ್ತಿರುವ ಕಾರಣದಿಂದ ಬಿಜೆಪಿ ಹೈಕಮಾಂಡ್ ವರದಿ ಕೇಳಿದೆ. ಬೆಲೆ ಏರಿಕೆಯ ಹೋರಾಟವನ್ನು ಬಿಜೆಪಿ ಹಾಗೂ ಜೆಡಿಎಸ್ ಕೈಗೊಂಡಿದ್ದು, ಪ್ರತ್ಯೇಕವಾಗಿಯೇ ಹೋರಾಟ ನಡೆಸುತ್ತಿವೆ. ಇದು ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಮೊನ್ನೆಯಷ್ಟೇ ಇದರ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅಸಮಾಧಾನ ಹೊರ ಹಾಕಿದ್ದರು. ಜೆಡಿಎಸ್ ಭದ್ರಕೋಟೆಯಲ್ಲಿ ಜೆಡಿಎಸ್ ಗೆ ಹೋರಾಟಕ್ಕೆ ಆಹ್ವಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಕೂಡ ಬಿಜೆಪಿ ಹೈಕಮಾಂಡ್ ಗೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ರಾಜ್ಯದ ಮೈತ್ರಿಯಲ್ಲಿ ಕೊರತೆ ಇದೆ ಎಂಬ ವಿಚಾರದಲ್ಲಿ ದೂರು ನೀಡುವ ಸಾಧ್ಯತೆ ಇದೆ. ಹೀಗಾಗಿ ಸಮನ್ವಯ ಸಮಿತಿ ರಚನೆ ಮಾಡಲು ಜೆಡಿಎಸ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.