ಮುಂಬೈ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ(Pahalgam attack) ಸಂಬಂಧಿಸಿ ವಿವಿಧ ರಾಜಕೀಯ ವ್ಯಕ್ತಿಗಳು ಒಂದೊಂದು ರೀತಿಯ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಕಾರಣವಾಗುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್. ಉಗ್ರರ ದಾಳಿ ಕುರಿತು ಸೋಮವಾರ ಇವರು ನೀಡಿರುವ ಹೇಳಿಕೆಯೊಂದು ಭಾರೀ ವಿವಾದ ಸೃಷ್ಟಿಸಿದೆ.
“ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನೇ ಕೇಂದ್ರ ಸರ್ಕಾರವೇ ಹೊತ್ತುಕೊಳ್ಳಬೇಕು. ಭಯೋತ್ಪಾದಕರು ಧರ್ಮವನ್ನು ಕೇಳಿಕೊಂಡು ಜನರನ್ನು ಕೊಂದರು ಎಂದು ಸರ್ಕಾರ ಹೇಳುತ್ತಿದೆ. ದಾಳಿ ಮಾಡಲು ಬಂದ ಭಯೋತ್ಪಾದಕರಿಗೆ ಇದೆಲ್ಲದಕ್ಕೂ ಸಮಯವಿರುತ್ತದೆಯೇ?… ಅಂಥದ್ದೆಲ್ಲ ನಡೆದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ.
ಭಯೋತ್ಪಾದಕರಿಗೆ ಯಾವುದೇ ಜಾತಿ ಅಥವಾ ಧರ್ಮವಿಲ್ಲ. ಪಹಲ್ಗಾಮ್ ದಾಳಿಯಂಥ ಹೀನ ಕೃತ್ಯಕ್ಕೆ ಕಾರಣರಾದವರನ್ನು ಮೊದಲ ಬಂಧಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಇದು ಇಡೀ ದೇಶದ ಭಾವನೆಯಾಗಿದೆ” ಎಂದು ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡುವ ವೇಳೆ ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಹೇಳಿದ್ದಾರೆ.
ವಡೆಟ್ಟಿವಾರ್ ಅವರ ಬಾಯಿಯಿಂದ ಈ ಹೇಳಿಕೆ ಹೊರಬೀಳುತ್ತಿದ್ದಂತೆಯೇ ಆಕ್ರೋಶ ಹೊರಹಾಕಿರುವ ಬಿಜೆಪಿ, “ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡಲು ಕಾಂಗ್ರೆಸ್ ನಾಯಕರು ಸ್ಪರ್ಧೆಗಿಳಿದಿದ್ದಾರೆ” ಎಂದು ಆರೋಪಿಸಿದೆ.
ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡಲು ಕಾಂಗ್ರೆಸ್ ನಾಯಕರು ಒಬ್ಬರ ನಂತರ ಒಬ್ಬರಂತೆ ಪೈಪೋಟಿ ನಡೆಸುತ್ತಿದ್ದಾರೆ. ಈಗ ವಿಜಯ್ ವಾಡೆಟ್ಟಿವಾರ್ ಅವರು ದಾಳಿಗೆ ಸರ್ಕಾರವೇ ಹೊಣೆ, ಪಾಕಿಸ್ತಾನವಲ್ಲ ಎನ್ನುತ್ತಾ, ಭಯೋತ್ಪಾದಕರು ಧರ್ಮದ ಆಧಾರದ ಮೇಲೆ ಜನರನ್ನು ಕೊಂದಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇದೆಯೇ ಎಂದು ಕೇಳುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಪ್ರಶ್ನಿಸಿದ್ದಾರೆ.
ಇಂಥ ಹೇಳಿಕೆಗಳು ಇದೇ ಮೊದಲೇನಲ್ಲ. ಎನ್ಸಿಪಿ-ಶರದ್ ಪವಾರ್ ಬಣದ ಅನಿಲ್ ದೇಶ್ಮುಖ್ ಅವರೂ ಇದೇ ಮಾದರಿಯ ಹೇಳಿಕೆ ನೀಡಿದ್ದರು. ಕೇಂದ್ರ ಸರ್ಕಾರ ನಡೆಸಿದ ಸರ್ವಪಕ್ಷ ಸಭೆಯಲ್ಲಿ, ದಾಳಿಗೆ ಪಾಕಿಸ್ತಾನವೇ ಜವಾಬ್ದಾರ, ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಿ, ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಿ, ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ ಎಂದೆಲ್ಲ ಹೇಳುತ್ತಾರೆ. ಸರ್ವಪಕ್ಷ ಸಭೆಯ ನಂತರ, ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಬೇಡಿ ಎನ್ನುತ್ತಾರೆ ಎಂದೂ ಪೂನಾವಾಲ ಆರೋಪಿಸಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಯ ನಂತರ ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಯೂ ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರಿಂದ ಈ ವಿವಾದಿತ ಹೇಳಿಕೆ ಹೊರಬಿದ್ದಿದೆ.