ಮಂಡ್ಯ: ಕನ್ನಡದ ಸಾಹಿತ್ಯ ಸಮ್ಮೇಳನದ ಅಭೂತ ಪೂರ್ವ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಮನವಿ ಮಾಡಿದ್ದಾರೆ.
ಪಾಂಡವಪುರ ಪಟ್ಟಣದ ಕಸಾಪ ಭವನದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಏಕೀಕರಣಗೊಂಡ ವೇಳೆ ಮಂಡ್ಯ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು. ಅದಾದ 50 ವರ್ಷಗಳ ನಂತರ ಮೂರನೇ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಮನೆಯ ಹಬ್ಬದಂತೆ ಸಂಭ್ರಮಿಸಿ ಸ್ವ ಇಚ್ಛೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೂರು ದಿನಗಳ ಕಾಲ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.
ಹೊರ ದೇಶಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಅನಿವಾಸಿ ಕನ್ನಡಿಗರು ಆಗಮಿಸುತ್ತಿದ್ದಾರೆ. ವಿದೇಶದಲ್ಲಿರುವ ವಿಶ್ವೇಶ್ವರಯ್ಯ ಅವರ ಮೊಮ್ಮಗಳು, ಪುತಿನ ಅವರ ಮಗಳು ಸೇರಿದಂತೆ ಅನೇಕ ಕನ್ನಡಿಗರು ಆಗಮಿಸುತ್ತಿರುವುದು ವಿಶೇಷವಾಗಿದೆ. ಯೂರೋಪ್ ರಾಷ್ಟ್ರದಲ್ಲಿರುವ ಹಲವು ಅನಿವಾಸಿ ಕನ್ನಡಿರು ಕೂಡ ಬರುತ್ತಿದ್ದಾರೆ ಎಂದು ಹೇಳಿದ್ದಾರೆ.
ಶಾಸಕ ದರ್ಶನ್ ಪುಟ್ಟಣ್ಣಯ್ಯ,ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್. ನಾಗರಾಜು, ಕಸಾಪ ಜಿಲ್ಲಾ ಸಂಚಾಲಕಿ ಮೀರಾ ಶಿವಲಿಂಗಯ್ಯ, ರಾಮಲಿಂಗ ಶೆಟ್ಟಿ, ಪಟೇಲ್ ಪಾಂಡು, ಕೃಷ್ಣೇಗೌಡ ಹೂಸ್ಕೂರು, ಅಪ್ಪಾಜಪ್ಪ, ಕಸಾಪ ಅಧ್ಯಕ್ಷ ಮೇನಾಗರ ಪ್ರಕಾಶ್, ತಹಸೀಲ್ದಾರ್ ಸಂತೋಷ್, ಇಒ ಲೋಕೇಶ್ ಮೂರ್ತಿ, ಲಯನ್ ಕೆ. ದೇವೇ ಗೌಡ, ಕೆ. ವಿ. ಬಸರಾಜು, ಅಂಜನಾ ಶ್ರೀಕಾಂತ್, ಕೃಷ್ಣ, ಕಾರ್ಯದರ್ಶಿಗಳಾದ ಎರೆ ಗೌಡನ ಹಳ್ಳಿ ವೆಂಕಟೇಶ್, ಚಿಕ್ಕಾಡೆ ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.