ನವದೆಹಲಿ: ಈಶಾನ್ಯ ಭಾರತದಲ್ಲಿ 2 ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಂಟಾದ ಭೂಕುಸಿತ ಹಾಗೂ ದಿಢೀರ್ ಪ್ರವಾಹದಿಂದ 30 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಮಣ್ಣು ಕುಸಿತದಿಂದ ಹಲವು ಮನೆಗಳು ಭೂಸಮಾಧಿಯಾಗಿದ್ದು, ಒಂದೇ ಕುಟುಂಬದ ಮೂವರು ಸೇರಿದಂತೆ 5 ಮಂದಿ ಮೃತಪಟ್ಟಿದ್ದಾರೆ. ಗೋಲಾಘಾಟ್, ಲಖೀಂಪುರದಲ್ಲಿ ಪ್ರವಾಹಕ್ಕೆ ಹಲವರು ಕೊಚ್ಚಿಹೋಗಿದ್ದಾರೆ.
ಚೀನಾದೊಂದಿಗೆ ಗಡಿ ಹಂಚಿಕೊಂಡಿರುವ ನೆರೆಯ ಅರುಣಾಚಲ ಪ್ರದೇಶದಲ್ಲಿ ಪ್ರವಾಹದ ನೀರಿನಲ್ಲಿ ವಾಹನವೊಂದು ಕೊಚ್ಚಿಹೋದ ಪರಿಣಾಮ ಅದರಲ್ಲಿದ್ದ 7 ಮಂದಿ ಮೃತಪಟ್ಟಿದ್ದಾರೆ. ಪ್ರತ್ಯೇಕ ಘಟನೆಯೊಂದರಲ್ಲಿ ನೀರಲ್ಲಿ ಮುಳುಗಿ ಇಬ್ಬರು ಸಾವಿಗೀಡಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ 2 ದಿನದಲ್ಲಿ ಮಳೆ ಸಂಬಂಧಿ ದುರ್ಘಟನೆಗಳಿಗೆ 9 ಮಂದಿ ಬಲಿಯಾದಂತಾಗಿದೆ.

ಮಿಜೋರಾಂ, ತ್ರಿಪುರ ಮತ್ತು ಮೇಘಾಲಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಒಂದೇ ದಿನ 8 ಮಂದಿ ಸಾವಿಗೀಡಾಗಿದ್ದಾರೆ. ದಿಢೀರ್ ಪ್ರವಾಹ ಹಾಗೂ ಭೂಕುಸಿತ ಇದಕ್ಕೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪುರದಲ್ಲಿ ಸತತ 3 ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜಧಾನಿ ಇಂಫಾಲ್ ಮಳೆಗೆ ತತ್ತರಿಸಿದೆ. ಹಲವು ಭಾಗಗಳು ಜಲಾವೃತವಾಗಿವೆ. ಪ್ರವಾಹ ಭೀತಿ ಎದುರಾಗಿರುವ ಕಾರಣ ಇಂಫಾಲ್ ನದಿ ತಟದ ಜನರಿಗೆ ಕೂಡಲೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಆಡಳಿತ ಸೂಚಿಸಿದೆ.
ಉತ್ತರ ಸಿಕ್ಕಿಂನಲ್ಲಿ ಭೂಕುಸಿತ ಉಂಟಾಗಿರುವ ಕಾರಣ ವಿವಿಧ ಭಾಗಗಳಲ್ಲಿ ಸುಮಾರು 1500 ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. 11 ಪ್ರವಾಸಿಗರು ಪ್ರಯಾಣಿಸುತ್ತಿದ್ದ ವಾಹನವು ಟೀಸ್ಟಾ ನದಿಗೆ ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇನ್ನೂ 8 ಮಂದಿ ನಾಪತ್ತೆಯಾಗಿದ್ದಾರೆ.

ಮುಂದಿನ ದಿನಗಳಲ್ಲೂ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಸ್ಸಾಂನ ಹಲವು ಭಾಗಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈಶಾನ್ಯದ ಇತರೆ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಸ್ಸಾಂನ 17 ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, 78 ಸಾವಿರ ಮಂದಿ ಅತಂತ್ರರಾಗಿದ್ದಾರೆ. ಸುಮಾರು 1200 ಮಂದಿ 5 ವಿವಿಧ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ದಳಗಳು ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಗಳಲ್ಲಿ ತೊಡಗಿವೆ. ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.