ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸೇನಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಹಲವು ನಿರ್ಧಾರ ಕೈಗೊಳ್ಳಲಾಗಿದೆ.
ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯ ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸಶಸ್ತ್ರ ಪಡೆಗಳಿಗೆ ‘ಸಂಪೂರ್ಣ ಸ್ವಾತಂತ್ರ್ಯ’ ನೀಡಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು ತಮ್ಮ ನಿರ್ಧಾರ ಘೋಷಿಸಿದ್ದಾರೆ ಎನ್ನಲಾಗಿದೆ.
‘ಭಾರತೀಯ ಸೇನೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ’ ಎಂದು ಮೋದಿ ಹೇಳಿದ್ದಾರೆ ಎನ್ನಲಾಗಿದೆ. ಆನಂತರ ಮೋದಿ ಅವರೊಂದಿಗೆ ಗೃಹ ಸಚಿವ ಅಮಿತ್ ಶಾ ಕೂಡ ಚರ್ಚೆ ನಡೆಸಿದ್ದಾರೆ.
ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ 26 ಜನ ಮೃತಪಟ್ಟಿದ್ದರು. ಫೆಬ್ರವರಿ 2019ರ ಪುಲ್ವಾಮಾ ದಾಳಿಯ ನಂತರ ದೇಶದಲ್ಲಿ ನಡೆದ ಅತ್ಯಂತ ಕೆಟ್ಟ ಘಟನೆ ಇದಾಗಿದೆ. ಇದರ ಹಿಂದೆ ಪಾಕಿಸ್ತಾನ ಇರುವುದು ಸಾಬೀತಾಗಿದೆ.