ಉಡುಪಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಪ್ರವಾಹ ಉಂಟಾಗಿ ಜನ- ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ, ಅರೆಹೊಳೆ, ಕುದ್ರು, ಸಾಲ್ಬುಡ, ಬಡಾಕೆರೆ, ಮರವಂತೆ, ಶಿರೂರು, ಬಿಜೂರು, ಯಡ್ತರೆ, ತಗ್ಗರ್ಸೆ, ಹೆರಂಜಾಲು, ನಾಡ, ಪಡುಕೋಣೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ. ಹೀಗಾಗಿ ಮನೆಗಳಿಗೆ ನೀರು ನುಗ್ಗಿದ್ದು, ಜಲ ದಿಗ್ಬಂಧನ ಉಂಟಾಗಿದೆ. ಬಹುತೇಕರು ಮನೆಯಲ್ಲಿ ಸಿಲುಕಿಕೊಂಡಿದ್ದು, ಆಚೆ ಬಾರದ ಸ್ಥಿತಿ ನಿರ್ಮಾಣವಾಗಿದೆ.

ವ್ಯಾಪಕವಾಗಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ. ಶಾಲಾ- ಕಾಲೇಜು ಮೈದಾನಗಳು ನೀರಿನಿಂದ ಆವೃತವಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಸೌಪರ್ಣಿಕಾ, ಕುಬ್ಜಾ, ಚಕ್ರ ನದಿಗಳು ತುಂಬಿ ಹರಿಯುತ್ತಿವೆ. ನದಿಯ ತಟದಲ್ಲಿ ಕಮಲಶಿಲೆ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ ಇರುವ ಹಿನ್ನೆಲೆಯಲ್ಲಿ ಪ್ರಾಂಗಣಕ್ಕೆ ಮಳೆ ನೀರು ನುಗ್ಗಿದೆ. ಮಳೆಯ ನೀರಿನಲ್ಲೇ ತೆರಳಿ ಅರ್ಚಕರು ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಮಾರುಕಟ್ಟೆ ಬ್ರಹ್ಮಲಿಂಗೇಶ್ವರ ದೇಗುಲಕ್ಕೂ ನೀರು ನುಗ್ಗಿದೆ.