ಹಾವೇರಿ: ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಆಯಾ ಇಲಾಖೆ ಅಧಿಕಾರಿಗಳು ಕ್ರೀಯಾಯೋಜನೆ ರೂಪಿಸಿ, ಆಯಾ ಸಾಲಿನಲ್ಲೇ ಆ ಯೋಜನೆಗಳ ಗುರಿ ಸಾಧನೆಗೆ ಕಾಳಜಿಯಿಂದ ಹಾಗೂ ಆಸಕ್ತಿಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಮಾಜಿ ಮುಖ್ಯ ಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿಯ ದಿಶಾ ಸಭೆಯಲ್ಲಿ ಜಲಜೀವನ್ ಕಾಮಗಾರಿ, ವಸತಿ, ಗ್ರಾಮ ಸಡಕ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಒಬ್ಬ ಅಧಿಕಾರಿಯಾದರೂ ಅಭಿವೃದ್ಧಿ ವರದಿ ನೀಡುತ್ತಿಲ್ಲ. ಯಾವಾಗಲೂ ಕಾರಣಗಳನ್ನು ಹೇಳುತ್ತೀರಿ, ಕೆಲಸ ಮಾಡಲು ಕಾರಣಗಲು ಬೇಕಿಲ್ಲ, ಮನಸ್ಸು ಬೇಕು. ಸಮಸ್ಯೆಗಳನ್ನು ಬಗೆಹರಿಸಲು ಆಗದಿದ್ದರೆ ಯಾಕೆ ಕೆಲಸಕ್ಕೆ ಬರುತ್ತೀರಿ ಎಂದು ಪ್ರಶ್ನಿಸಿದರು.
ಸಮಾಜದ ಬಗ್ಗೆ ಕಾಳಜಿ ಇರಬೇಕು, ಗ್ರಾಮಗಳ ಹಾಗೂ ನಗರದ ಸ್ವಚ್ಛತೆ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಒಂದು ಯೋಜನೆ ಪೂರ್ಣಗೊಳ್ಳಲು ಐದಾರು ವರ್ಷ ಕಳೆದರೆ ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡಲು ಹೇಗೆ ಸಾಧ್ಯ. ಹಾಗಾಗಿ ಅಧಿಕಾರಿಳು ಜವಾಬ್ದಾರಿಯಿಂದ ಸಮನ್ವಯದಿಂದ ಯೋಜನೆಗಳನ್ನು ನಿಗಧಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬಡತನ ನೀಗಿಸಲು ಮನೆ ಬೇಕು:
ದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಆಹಾರ, ಶಿಕ್ಷಣ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಆದರೆ ವಸತಿ ಸಮಸ್ಯೆ ದೊಡ್ಡದಾಗಿದೆ. ಬಡತನ ನೀಗಿಸಲು ಮನೆ ಬೇಕು. ಈ ಹಿನ್ನಲೆಯಲ್ಲಿ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸಮಾಡಬೇಕು ಎಂದು ಸೂಚಿಸಿದರು.
ಅರಣ್ಯ ಒತ್ತುವತಿ ತಡೆಯಿರಿ:
ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ನಡೆಯುತ್ತಿದ್ದು, ಖಾಸಗಿಯವರು ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ, ಅರಣ್ಯ ಒತ್ತುವರಿ ನಿಲ್ಲಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ 9.5 ರಷ್ಟು ಅರಣ್ಯ ಪ್ರದೇಶವಿದ್ದು, ಎರಡು ಸಾವಿರ ಹೆಕ್ಟೇರ್ ಡೀಮ್ಡ್ ಅರಣ್ಯವೆಂದು ಗುರುತಿಸಲಾಗಿದ್ದು, ಇದನ್ನು ಸರ್ವೇ ಮಾಡಲಾಗುತ್ತಿದೆ. ಅರಣ್ಯ ಒತ್ತುವರಿ ತಡೆಯಲಾಗುತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ವ್ಯವಸ್ಥಿತವಾಗಿ ಕೆಲಸಮಾಡಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಾಡುವ ಸೇವಾ ರಸ್ತೆಗಳು, ರಸ್ತೆಗಳ ಪಕ್ಕದ ಗಟಾರ್ಗಳನ್ನು ವ್ಯವಸ್ಥಿತವಾಗಿ ಹಾಗೂ ರಸ್ತೆಗಳಲ್ಲಿ ನೀರು ನಿಲ್ಲದಂತೆ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ಯಾವುದೇ ರೀತಿಯಿಂದ ಸೇವಾ ರಸ್ತೆಗಳ ಹಾಗೂ ಗಟಾರ್ ಸಮಸ್ಯೆ ದೂರು ಬರಬಾರದು. ಶಿಗ್ಗಾಂವ ಪಟ್ಟಣದ ಸೇವಾ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಕೂಡಲೇ ದುರಸ್ತಿಗೆ ಕ್ರಮಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಕಲಿ ಪಡಿತರ ಚೀಟಿ ಪತ್ತೆ ಹಚ್ಚಿ:
ಜಿಲ್ಲೆಯಲ್ಲಿ ನಕಲಿ ಪಡಿತರ ಚೀಟಿಗಳ ಹಾವಳಿ ಹೆಚ್ಚಾಗಿದ್ದು, ಈ ಕುರಿತು ಹೆಚ್ಚಿನ ನಿಗಾವಹಿಸಬೇಕು. ಅರ್ಹರಿಗೆ ಮಾತ್ರ ಬಿಪಿಎಲ್ ಪಡಿತರ ಚೀಟಿ ನೀಡಬೇಕು. ತುರ್ತು ವೈದ್ಯಕೀಯ ತುರ್ತು ಸೇವೆಗೆ ವೈದ್ಯಕೀಯ ಪ್ರಮಾಣಪತ್ರ ಪಡೆಯುವಾಗ ಲಂಚ ಪಡೆಯುತ್ತಿರುವ ದೂರುಗಳು ಬಂದಿವೆ. ಹಾಗಾಗಿ ತುರ್ತು ವೈದ್ಯಕೀಯ ಸೇವೆಗೆ ಪಡಿತರ ಚೀಟಿ ಮಂಜೂರು ಮಾಡುವಾಗ ಕೂಲಂಕುಷವಾಗಿ ಪರಿಶೀಲಿಸಿ ನೀಡಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ 46,614 ಎಎವೈ ಹಾಗೂ 3,50,953 ಬಿಪಿಎಲ್ ಸೇರಿ 3,97,567 ಪಡಿತ ಚೀಟಿಗಳಿದ್ದು, ಈ ಪೈಕಿ 23,906 ಅರ್ಹ ಫಲಾನುಭವಿಗಳ ಪಡಿತರ ಚೀಟಿ ಪಟ್ಟಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಶಾಲಾ ದಾಖಲಾತಿಗೆ ಹಣ: ಕೆಪಿಎಸ್ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಶಿಕ್ಷಕರು ಹಣ ಪಡೆಯುತ್ತಿದ್ದು, ಇದು ನಾಚಿಕೆ ಸಂಗತಿಯಾಗಿದೆ. ಬಡವರ ಸಣ್ಣ ಮಕ್ಕಳ ದಾಖಲಾತಿಗೆ ಭ್ರಷ್ಟಚಾರ ನಡೆದರೆ ಮುಂದಿನ ದಿನಗಳಲ್ಲಿ ದೇಶದ ಗತಿ ಏನು?. ಶಿಕ್ಷಣ ಇಲಾಖೆ ಅಧಿಕಾರಿಗಳು ಇದರಲ್ಲಿ ಶ್ಯಾಮಿಲಿರುವುದಾಗಿ ತಿಳಿದುಬಂದಿದೆ. ಇದು ತನಿಖೆಯಿಂದ ಗೊತ್ತಾಗುತ್ತದೆ. ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ನಿಗಾವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನಿಮ್ಮ ಮಕ್ಕಳಿಗೆ ಪೌಡರ್ ಕೊಡತಿರಾ? : ಜಿಲ್ಲೆಯಲ್ಲಿ 394 ಸಾಧಾರಣ ಮಕ್ಕಳು ಹಾಗೂ 89 ಅಪೌಷ್ಠಿಕ ಮಕ್ಕಳಿದ್ದಾರೆ. ಮಕ್ಕಳಿಗೆ ಪ್ರೋಟಿನ್ ಪೌಡರ್ ನೀಡುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದಾಗ, ಮಕ್ಕಳಿಗೆ ಆಹಾರ ನೀಡುವಾಗ ಸಮಸ್ಯೆ ಇತ್ತು, ಈಗ ಪೌಡರ್ ನೀಡುವುದು ಬಹಳ ದೊಡ್ಡ ಅನಾಹುತವಾಗಿದೆ. ನಿಮ್ಮಮಕ್ಕಳಿಗೆ ಪೌಡರ್ ಕೊಡತಿರಾ? ಎಂದು ಸಂಸದರು ಅಧಿಕಾರಿಗಳನ್ನು ಪ್ರಶ್ನಿಸಿದರು. ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಿಸಲು ಆರೋಗ್ಯ ಇಲಾಖೆ ಸಮನ್ವಯೊಂದಿಗೆ ಕೆಲಸಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತರಬೇತಿಗೆ ಒಪ್ಪಂದ: ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ ಇಂಜನೀಯರಿಂಗ್, ಡಿಪ್ಲೋಮಾ ಹಾಗೂ ಐಟಿಐ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ನೀಡಲು ಒಪ್ಪಂದ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮನ್ವಯದಿಂದ ಕೆಲಸಮಾಡಿ: ಹಾವೇರಿ ಉತ್ತಮ ಜಿಲ್ಲೆಯಾಗಿದ್ದು, ಈ ಜಿಲ್ಲೆಯ ಅಭಿವೃದ್ಧಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೆಲಸಮಾಡಬೇಕು ಎನ್ನುವುದು ನನ್ನ ಕಳಕಳಿಯಾಗಿದೆ. ಯೋಜನೆಗಳಲ್ಲಿ ಅನುಷ್ಠಾನದಲ್ಲಿ ಸಮಸ್ಯೆಗಳಿದ್ದರೆ ವಿಳಂಬ ಮಾಡದೇ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಕೈಗಾರಿಕೆ, ಆರೋಗ್ಯ, ಪಶು ಸಂಗೋಪನೆ, ಹೆಸ್ಕಾಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ನಿಗಮಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಜಿಂದಾಲ್ ಉಪಸ್ಥಿತರಿದ್ದರು.