ರಾಯಚೂರು : ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾರಾಯಣಪೂರು ಜಲಾಶಯದಿಂದ 1.10 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕಾಡ್ಲೂರು ಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣ ದೇವರ ದೇವಸ್ಥಾನ ಜಲಾವೃತಗೊಂಡಿದೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಡದಲ್ಲಿರುವ ಇನ್ನಿತರ ದೇವಸ್ಥಾನಗಳಿಗೂ ಜಲಾವೃತ ಭೀತಿ ಎದುರಾಗಿದೆ. ಜಿಲ್ಲೆಯ ಕೆಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ.
ದೇವದುರ್ಗ ತಾಲ್ಲೂಕಿನ ಹೂವಿನ ಹೆಡಗಿ ಸೇತುವೆ, ಲಿಂಗಸಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ಸೇರಿದಂತೆ ಹಲವು ಸೇತುವೆಗಳು ಮುಳುಗಡೆಯಾಗುವ ಭೀತಿ ಎದುರಾಗುತ್ತಿದೆ. ಜಲಾಶಯದ ಒಳ ಹರಿವು ಹೆಚ್ಚಳವಾದಲ್ಲಿ ನದಿಗೆ ಅಧಿಕ ನೀರು ಬಿಡುವ ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದಲ್ಲಿನ ಜನರು ಎಚ್ಚರಿಕೆಯಿಂದ ಇರಬೇಕೆಂದು ಎಚ್ಚರಿಕೆ ನೀಡಲಾಗಿದೆ.