ಬೆಂಗಳೂರು : ಭೂ ಕಬಳಿಕೆ ಆರೋಪದ ಹಿನ್ನೆಲೆ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಎನ್. ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸರ್ಕಾರಿ ಗೋಮಾಳ ಜಮೀನನ್ನು ಪತ್ನಿ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಎನ್. ಆರ್. ರಮೇಶ್ ಆರೋಪಿಸಿ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಒಟ್ಟು 165 ಕೋಟಿ ಮೌಲ್ಯದ 26 ಎಕರೆ ಗೋಮಾಳ ಜಮೀನು ಕಬಳಿಕೆ ಮಾಡಿ, 54 ಕೋಟಿ ಮೌಲ್ಯದ 8 ಎಕರೆ ಜಮೀನು ಪತ್ನಿ ರಾಧಾ ಬಾಲಕೃಷ್ಣ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಸರ್ವೇ ನಂಬರ್ 233, 234, 235, 236ರ ಗೋಮಾಳ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಮೂರನೇ ವ್ಯಕ್ತಿಗೆ ಮಂಜೂರು ಮಾಡಿ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.
2025ರ ಏಪ್ರಿಲ್ 3ರಂದು ಕೆಂಗೇರಿ ಉಪ ನೋಂದಣಿ ಅಧಿಕಾರಿ ಕಚೇರಿಯಲ್ಲಿ ರೆಜಿಸ್ಟ್ರೇಷನ್ ಮಾಡಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಇದೇ ರೀತಿ ಒಟ್ಟು 22 ಮಂದಿ ವಿರುದ್ಧ ದೂರು ದಾಖಲಿಸಿರುವ ಬಿಜೆಪಿ ಮುಖಂಡ ಎನ್. ಆರ್. ರಮೇಶ್. ಯಶವಂತಪುರ ಶಾಸಕ ಎಸ್ .ಟಿ ಸೋಮಶೇಖರ್ ಆಪ್ತರ ಮೇಲೂ ದೂರು ದಾಖಲಾಗಿದೆ. ಒಟ್ಟು 800 ಕೋಟಿ ಮೌಲ್ಯದ 108 ಎಕರೆ ಸರ್ಕಾರಿ ಗೋಮಾಳ ಜಮೀನು ಕಬಳಿಕೆ ಎಂದು ಲೋಕಾಯುಕ್ತದಲ್ಲಿ ದೂರು ನೀಡಿದ್ದಾರೆ.