ಬೀದರ್: ಬೀದರ್ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಹಿರಿಯ ನಾಯಕರು ಕೂಡ ತಲೆ ಕೆಡಿಸಿಕೊಳ್ಳುವಂತಾಗಿದೆ. ಬಿಜೆಪಿ ಶಾಸಕರು ಹಾಗೂ ಕಾಂಗ್ರೆಸ್ ಸಚಿವರ ಒಳ ಒಪ್ಪಂದದಿಂದಾಗಿ ಭಿನ್ನಮತ ಸ್ಫೋಟಗೊಂಡಿದೆ ಎಂಬ ಆರೋಪ ಕೇಳಿ ಬಂದಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬಿಜೆಪಿ ಶಾಸಕರು ಬೆಂಬಲಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಮಗನ ಗೆಲುವಿಗಾಗಿ ಬಿಜೆಪಿ ಶಾಸಕರು, ಕಾರ್ಯಕರ್ತರಿಗೆ ಸಚಿವ ಈಶ್ವರ್ ಖಂಡ್ರೆ ಅಭಯಹಸ್ತ ಚಾಚಿದ್ದಾರೆ. ಹೀಗಾಗಿ ಬಿಜೆಪಿ ಶಾಸಕರು ಸಹಾಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಸಚಿವ ಈಶ್ವರ್ ಖಂಡ್ರೆ ಕಾರಣ ಎಂದು ಹಲವರು ಆರೋಪಿಸುತ್ತಿದ್ದಾರೆ. ಅತೃಪ್ತರ ಸಭೆ ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆದಿದ್ದು, ಈ ವೇಳೆ ಅತೃಪ್ತರು ಬಹಿರಂಗವಾಗಿ ಆರೋಪಿಸಿದ್ದಾರೆ.
ಮಾಜಿ ಸಚಿವ ರಾಜಶೇಖರ್ ಪಾಟೀಲ್ ಸಮ್ಮುಖದಲ್ಲೇ ಮಾಜಿ ಎಂಎಲ್ಸಿ ಅರವಿಂದಕುಮಾರ್ ಅರಳಿ ಬಹಿರಂಗವಾಗಿ ಅಸಮಾಧನ ವ್ಯಕ್ತಪಡಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸಚಿವ ಈಶ್ವರ್ ಖಂಡ್ರೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದರು. ಅವರಿದ್ದಾಗಲೇ ಜಿಲ್ಲೆಯ 6 ಕ್ಷೇತ್ರಗಳ ಪೈಕಿ ಕೇವಲ 2 ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದ್ದೇವೆ. ವಿಧಾನಸಭೆ ಚುನಾವಣೆಯಲ್ಲಿ ಬೀದರ್ನ 4 ಕ್ಷೇತ್ರಗಳಲ್ಲಿ ಸೋಲು ಕಂಡಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಕ್ಷೇತ್ರದಲ್ಲೇ ಕೈ ಅಭ್ಯರ್ಥಿಗೆ ಹೆಚ್ಚು ಮತ ಬಂದಿವೆ. ಅದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯವರು ಸಪೋರ್ಟ್ ಮಾಡಿದ್ದಾರೆ ಎಂದು ಖುದ್ದು ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಉಪವಾಸ-ವನವಾಸ ಬಿದ್ದು ಹಗಲಿರುಳು ಶ್ರಮಿಸಿದ್ದಾರೆ. ಗೆದ್ದ ಮೇಲೆ ಬಿಜೆಪಿಯವರು ಸಪೋರ್ಟ್ ಮಾಡಿದ್ದಾರೆ ಅಂದ್ರೆ ಕಾರ್ಯಕರ್ತರಿಗೆ ಅವಮಾನ ಮಾಡಿದ ಹಾಗೆ ಅಲ್ವಾ?ಇವತ್ತು, ನಾಳೆ ಸರಿ ಹೋಗುತ್ತೆ ಅಂತಾ ಸುಮ್ಮನಿದ್ದೇವು. ಆದರೆ, ಇದು ಈಗ ಜಾಸ್ತಿ ಆಗುತ್ತಿದೆ. ನಾವು ಪಕ್ಷದಲ್ಲಿ ವೈಮನಸ್ಸು, ಭಿನ್ನಮತ ಬೇಡ ಅಂತಾ ಸಭೆ ಮಾಡುತ್ತಿದ್ದೇವೆ ಎಂದು ಸಚಿವ ಈಶ್ವರ್ ಖಂಡ್ರೆ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾರೆ.