ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಪಾಕಿಸ್ತಾನ ಪಡೆಗಳು ಗುರುವಾರ ರಾತ್ರಿ ಭಾರತೀಯ ಮುಂಚೂಣಿ ನೆಲೆಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ(Firing In LOC) ನಡೆಸಿದೆ. ರಾತ್ರಿಯಿಡೀ ಗಡಿಯಲ್ಲಿ ಗುಂಡಿನ ಸದ್ದು ಕೇಳಿಸಿದೆ. ಇದಕ್ಕೆ ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಪಾಕಿಸ್ತಾನ ಸೇನೆಗೆ ಭದ್ರತಾ ಪಡೆಗಳು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದ್ದು, ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅವರು ಹೇಳಿದರು.
“ಗುರುವಾರ ರಾತ್ರಿ ಪಾಕಿಸ್ತಾನವು ನಿಯಂತ್ರಣ ರೇಖೆಯ ಉದ್ದಕ್ಕೂ ಕೆಲವು ಸ್ಥಳಗಳಲ್ಲಿ ಸಣ್ಣ ಶಸ್ತ್ರಾಸ್ತ್ರಗಳ ಮೂಲಕ ಗುಂಡಿನ ದಾಳಿ ನಡೆಸಿರುವ ಘಟನೆಗಳು ನಡೆದಿವೆ. ಗುಂಡಿನ ದಾಳಿಗೆ ಸೂಕ್ತ ಪ್ರತ್ಯುತ್ತರ ನೀಡಲಾಗಿದೆ” ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿಯಲ್ಲಿ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಪೋಸ್ಟ್ ಮೇಲೆ ಪಾಕಿಸ್ತಾನ ಸೇನೆಯು ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿತ್ತು. ತರುವಾಯ, ಭಾರತವೂ ಪ್ರತೀಕಾರ ತೀರಿಸಿಕೊಂಡಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ವಸ್ತು ಹಾನಿ ಸಂಭವಿಸಿರಲಿಲ್ಲ. ಈಗ ಮತ್ತೆ ಕದನ ವಿರಾಮ ಉಲ್ಲಂಘನೆಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದ ಕೆಲವೇ ದಿನಗಳಲ್ಲಿ ಈ ಗುಂಡಿನ ಚಕಮಕಿ ನಡೆದಿದ್ದು, ನೆರೆ ರಾಷ್ಟ್ರಗಳ ನಡುವೆ ಹೊಸ ಬಿಕ್ಕಟ್ಟನ್ನು ಹುಟ್ಟುಹಾಕಿದೆ.
ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ನೇಪಾಳಿ ಪ್ರಜೆ ಸೇರಿದಂತೆ 26 ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆರು ದಶಕಗಳಷ್ಟು ಹಳೆಯದಾದ ಸಿಂಧೂ ಜಲ ಒಪ್ಪಂದ ರದ್ದು, ಅಟ್ಟಾರಿ-ವಾಘಾ ಗಡಿ ಮುಚ್ಚುವುದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಭಾರತ ಕೈಗೊಂಡಿದ್ದು, ಪಾಕಿಸ್ತಾನಕ್ಕೆ ಭಾರೀ ಹೊಡೆತ ನೀಡಿದೆ.
ಇದೇ ವೇಳೆ, ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾರೆನ್ನಲಾದ ಇಬ್ಬರು ಸ್ಥಳೀಯ ಉಗ್ರರ ಮನೆಗಳನ್ನು ಐಇಡಿ (ಸುಧಾರಿತ ಸ್ಫೋಟಕ) ಇಟ್ಟು ಸ್ಫೋಟಿಸಲಾಗಿದೆ. ಪಾಕಿಸ್ತಾನಿ ಉಗ್ರರ ಹೆಡೆಮುರಿ ಕಟ್ಟುವ ಕಾರ್ಯಾಚರಣೆಯೂ ಭರದಿಂದ ಸಾಗಿದೆ.