ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ(Pahalgam Attack) ಬೈಸರನ್ನಲ್ಲಿ 26 ನಾಗರಿಕರ ಹತ್ಯಾಕಾಂಡದ ಬೆನ್ನಲ್ಲೇ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿರುವಂತೆಯೇ ಪಾಕಿಸ್ತಾನ ಪಡೆಗಳು ಶುಕ್ರವಾರ ರಾತ್ರಿ ಮತ್ತೆ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. ಗುರುವಾರ ರಾತ್ರಿಯೂ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನವು ಭಾರತದ ಸೇನೆಯನ್ನು ಪ್ರಚೋದಿಸಲು ಪ್ರಯತ್ನಿಸುತ್ತಿರುವುದು ಇದು ಎರಡನೇ ಬಾರಿ.
ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ನಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನೆಗಳನ್ನು ಬೇರ್ಪಡಿಸುವ ಗಡಿಯಾದ ನಿಯಂತ್ರಣ ರೇಖೆಯ ಉದ್ದಕ್ಕೂ ಅನೇಕ ಪೋಸ್ಟ್ಗಳಿಂದ ಗುಂಡಿನ ದಾಳಿ ನಡೆದಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತೀಯ ಪಡೆಗಳು ಪ್ರತಿದಾಳಿ ನಡೆಸುವ ಮೂಲಕ ಸೂಕ್ತವಾಗಿ ಪ್ರತೀಕಾರ ತೀರಿಸಿಕೊಂಡಿವೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಏಪ್ರಿಲ್ 25-26 ರ ರಾತ್ರಿ, ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನದ ಹಲವು ಸೇನಾ ಶಿಬಿರಗಳಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ. ಭಾರತೀಯ ಪಡೆಗಳೂ ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ಸೂಕ್ತ ಪ್ರತ್ಯುತ್ತರ ನೀಡಿವೆ ಎಂದು ಸೇನಾ ಹೇಳಿಕೆಯಲ್ಲಿ ತಿಳಿಸಲಾಗಿದೆ.
ನಿಯಂತ್ರಣ ರೇಖೆಯ ಉದ್ದಕ್ಕೂ ಭಯೋತ್ಪಾದಕರ ಹಾಟ್ ಸ್ಪಾಟ್ಗಳ ವಿರುದ್ಧ ನಿರ್ಣಾಯಕ ಕ್ರಮ ತೆಗೆದುಕೊಳ್ಳಲು ಭಾರತದೊಳಗೆ ಕೂಗು ಹೆಚ್ಚಾಗಿರುವಂತೆಯೇ, ಪಾಕಿಸ್ತಾನ ಪಡೆಗಳು ಭಾರತೀಯ ಸೈನಿಕರು ಅಲರ್ಟ್ ಆಗಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ಪ್ರಯತ್ನಿಸುತ್ತಿವೆ ಎಂದು ಮಿಲಿಟರಿ ಮೂಲಗಳು ಹೇಳಿವೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕ್ ವಿರುದ್ಧ ಭಾರತವು ಹಲವು ಕ್ರಮಗಳನ್ನು ಕೈಗೊಂಡಿರುವಂತೆಯೇ ಕದನ ವಿರಾಮ ಉಲ್ಲಂಘನೆಯಾಗಿದೆ. ಮಂಗಳವಾರ ನಡೆದ ಹತ್ಯಾಕಾಂಡದಲ್ಲಿ, “ಮಿನಿ ಸ್ವಿಜರ್ಲೆಂಡ್” ಎಂದು ಕರೆಯಲ್ಪಡುವ ಬೈಸರನ್ ಹುಲ್ಲುಗಾವಲಿನಲ್ಲಿ ರಜಾದಿನಗಳನ್ನು ಕಳೆಯುತ್ತಿದ್ದ ಕನಿಷ್ಠ 26 ಪ್ರವಾಸಿಗರನ್ನು ಐವರು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್ಇಟಿ) ದೊಂದಿಗೆ ಸಂಪರ್ಕ ಹೊಂದಿರುವ ದಿ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. 26/11 ದಾಳಿಯ ಮಾಸ್ಟರ್ ಮೈಂಡ್ ಮತ್ತು ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಈ ದಾಳಿಕೋರರ ಹ್ಯಾಂಡ್ಲರ್ ಎಂದು ಮೂಲಗಳು ತಿಳಿಸಿವೆ.