ಮೈಸೂರು: ಬೆಂಗಳೂರು ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಸಮರಕ್ಕೆ ಸಿದ್ಧ ಎಂದು ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.
ಸುಪ್ರಿಂ ಕೋರ್ಟ್ನಲ್ಲಿ ವಿಚಾರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದರು. ಈ ಸಂಪುಟ ಸಭೆಯಲ್ಲಿ ರಸ್ತೆ ಅಗಲೀಕರಣಕ್ಕೆ ಬೆಂಗಳೂರಿನ ಅರಮನೆಯ ಜಾಗವನ್ನು ಬಳಸಿಕೊಳ್ಳುವ ಕುರಿತು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಬೇಕಾದ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸುವ ನಿರ್ಣಯ ಕೈಗೊಳ್ಳಲಾಗಿದೆ. ಬೆಂಗಳೂರು ಅರಮನೆ ರಸ್ತೆ ಅಗಲೀಕರಣ ಯೋಜನೆ ವಿಚಾರವಾಗಿ ಟಿಡಿಆರ್ ವಿಸ್ತರಣೆಗೆ ಸಂಪುಟ ನಿರಾಕರಿಸಿದೆ. ಹೀಗಾಗಿ ಪ್ರಮೋದಾದೇವಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯದಲ್ಲಿ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದಿದ್ದಾರೆ.
1996ರಲ್ಲಿನ ಅಕ್ವಿಜೇಶನ್ ಆ್ಯಂಡ್ ಸ್ಟೇ ಆರ್ಡರ್ ಕೂಡ ನಮ್ಮ ಬಳಿಯಿದೆ. ಸುಪ್ರೀಂ ಕೋರ್ಟ್ ಕೂಡ ಬೆಂಗಳೂರು ಅರಮನೆ ಜಾಗದ ಬಗ್ಗೆ ಹೇಳಿದೆ. ಸರ್ಕಾರ ಸ್ಟೇ ಇಲ್ಲ ಅಂದಿದೆ. ಆದರೆ ಸ್ಟೇ ಇದೆ ಹಾಗೂ ಮಾಲೀಕತ್ವ ಇದೆ. ಈಗಲೂ ನಾವೇ ಬೆಂಗಳೂರು ಅರಮನೆ ಜಾಗದ ಓನರ್ ಆಗಿದ್ದೇವೆ ಎಂದಿದ್ದಾರೆ.