ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ಜೂನ್ 10ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು, ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಿದೆ.
ಮೇ ತಿಂಗಳಲ್ಲಿ ಮಳೆರಾಯ ಆರ್ಭಟ ನಡೆಸಿದ್ದ. ಅದರಲ್ಲೂ ಬೆಂಗಳೂರಿನಲ್ಲಂತೂ ಮಳೆಯಿಂದಾಗಿ ಜನರು ಹೈರಾಣಾಗಿ ಹೋಗಿದ್ದರು. ಮುಂಗಾರು ಪೂರ್ವ ಮಳೆಯೇ ಈ ರೀತಿ ಆದರೆ, ಮುಂಗಾರು ಮಳೆ ಯಾವ ರೀತಿ ಸುರಿಯಬಹುದು ಎಂದು ಜನರು ಭಯಭೀತರಾಗಿದ್ದರು. ಆದರೆ, ಮುಂಗಾರು ಆರಂಭ ಅಷ್ಟೊಂದು ಜೋರಾಗಿರಲಿಲ್ಲ. ಈಗ ಮುಂಗಾರು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಸುದ್ದಿ ಕೇಳಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಜೂನ್ 10 ರಿಂದ 12ರ ವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಉತ್ತರ ಒಳನಾಡಿನ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಪ್ರವೇಶ ಪಡೆದಿದ್ದು, ಮೇ ತಿಂಗಳಲ್ಲಿ ದಾಖಲೆ ಮಳೆ ಸುರಿದಿದೆ. ಸದ್ಯ ಮತ್ತೆ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಜೂನ್ ಮತ್ತು ಜುಲೈನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.