ನವದೆಹಲಿ: ದೇಶಾದ್ಯಂತ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7 ಸಾವಿರ ದಾಟಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವೆಂಬಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಎಲ್ಲರಿಗೂ ಆರ್ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಸಂಜೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ, ದೆಹಲಿಯ ಎಲ್ಲ 7 ಸಂಸದರು ಹಾಗೂ ಶಾಸಕರು ಸೇರಿದಂತೆ ಸುಮಾರು 70 ಮಂದಿ ಬಿಜೆಪಿ ಪದಾಧಿಕಾರಿಗಳು ಪ್ರಧಾನಮಂತ್ರಿಗಳ ನಿವಾಸದಲ್ಲಿ ಮೋದಿಯವನ್ನು ಭೇಟಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇವರೆಲ್ಲರನ್ನೂ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ಹೇಳಿವೆ.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ದೆಹಲಿ ನಾಯಕರನ್ನು ಇಂದು ರಾತ್ರಿ 7.30ಕ್ಕೆ ಔತಣಕೂಟಕ್ಕೆ ಆಹ್ವಾನಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬಿಡುಗಡೆ ಮಾಡಿದ ಅಧಿಕೃತ ದತ್ತಾಂಶದ ಪ್ರಕಾರ, ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 306 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.
ಕೇರಳದಲ್ಲಿ ಮೂರು ಸಾವು, ಮಹಾರಾಷ್ಟ್ರದಲ್ಲಿ ಒಂದು ಮತ್ತು ಕರ್ನಾಟಕದಲ್ಲಿ ಎರಡು ಸಾವು ಸಂಭವಿಸಿವೆ. ಕೇರಳದಲ್ಲಿ ಕೋವಿಡ್ ಕೇಸುಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಒಂದೇ ದಿನದಲ್ಲಿ 170 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನು ಗುಜರಾತ್ ನಲ್ಲಿ 114 ಹೊಸ ಸೋಂಕು ಕಾಣಿಸಿಕೊಂಡಿದ್ದು ಸಕ್ರಿಯ ಸೋಂಕಿತರ ಸಂಖ್ಯೆ 1223ಕ್ಕೇರಿಕೆಯಾಗಿದೆ. ಕರ್ನಾಟಕದಲ್ಲಿ ಹೊಸದಾಗಿ 100 ಕೇಸುಗಳು ದೃಢಪಟ್ಟಿದೆ ಎಂದು ಸರ್ಕಾರ ತಿಳಿಸಿದೆ. ದೆಹಲಿಯಲ್ಲಿ 24 ಗಂಟೆಗಳಲ್ಲಿ 66 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಪ್ರಕರಣಗಳು 757ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ ಎಲ್ಲ ಆಸ್ಪತ್ರೆಗಳಲ್ಲೂ ಮಾಕ್ ಡ್ರಿಲ್ ಆರಂಭಿಸಿದ್ದು, ಸಾಕಷ್ಟು ಆಮ್ಲಜನಕ, ಐಸೋಲೇಷನ್ ಬೆಡ್ ಗಳು, ವೆಂಟಿಲೇಟರ್ ಗಳು ಹಾಗೂ ಅಗತ್ಯ ಔಷಧಗಳು ಲಭ್ಯವಿರುವುದನ್ನು ಖಾತ್ರಿಪಡಿಸಿಕೊಳ್ಳಲಾಗುತ್ತಿದೆ.