ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ನೀರಿನ ಹರಿವು ಹೆಚ್ಚಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಶ್ರಮಬಿಂದು ಸಾಗರ ಮುಳುಗಿ ಹೋಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಶ್ರಮಬಿಂದು ಸಾಗರದಲ್ಲಿ 4 ಟಿಎಂಸಿ ನೀರು ಸಂಗ್ರಹವಾಗಿದೆ.
ಈ ಹಿನ್ನೆಲೆಯಲ್ಲಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ಬ್ಯಾರೇಜ್ ಮೇಲೆ ನೀರು ಹರಿದು ಬರುತ್ತಿದೆ. ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ 1,06,750 ಕ್ಯೂಸೆಕ್ ಒಳಹರಿವು ಇದ್ದು, 1,06,000 ಕ್ಯೂಸೆಕ್ ಹೊರಹರಿವಿದೆ. ಹೀಗಾಗಿ ಹಿಪ್ಪರಗಿ ಜಲಾಶಯದ ಕೆಳಭಾಗದಲ್ಲಿ ಇರುವ ಶ್ರಮಬಿಂದು ಸಾಗರ ಸಂಪೂರ್ಣ ತುಂಬಿ, ಮೇಲೆ ನೀರು ಹರಿದು ಹೋಗುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.