ಕೇಂದ್ರ ಸರ್ಕಾರ ಜಾತಿ ಆಧಾರಿತ ಜನಗಣತಿ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕೇಂದ್ರ ಸರ್ಕಾರ ಬಹಳ ಉತ್ತಮ ನಿರ್ಧಾರ ಕೈಗೊಂಡಿದೆ. ಜನಗಣತಿ ಜತೆಗೆ ಜಾತಿ ಜನಗಣತಿಯೂ ಮಾಡುವ ನಿರ್ಧಾರ ಮಾಡಲಾಗಿದೆ. 1931 ರ ನಂತರ ದೇಶದಲ್ಲಿ ಜಾತಿ ಜನಗಣತಿ ನಡೆದಿರಲಿಲ್ಲ. ಎಲ್ಲ ಸಮುದಾಯಗಳಿಗೂ ನ್ಯಾಯ ಸಿಗಬೇಕು ಎನ್ನುವುದು ಮೋದಿ ಅವರ ಉದ್ಧೇಶವಾಗಿದೆ. ಹೀಗಾಗಿ ಅವರು ಈ ನಿರ್ಧಾರ ಕೈಗೊಂಡಿದೆ. ಸರ್ಕಾರದ ಈ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದಿದ್ದಾರೆ.
ನಮ್ಮ ರಾಜ್ಯದಲ್ಲಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಸಮಾಜ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಹೀಗಾಗಿ ಈಗ ಕೇಂದ್ರದ ನಿರ್ಧಾರ ರಾಜ್ಯ ಸರ್ಕಾರಕ್ಕೂ ಅಚ್ಚರಿ ತಂದಿದೆ. ರಾಜ್ಯ ಸರ್ಕಾರಗಳಿಗೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ. ಇದು ಗೊತ್ತಿದ್ದರೂ ಸಿದ್ದರಾಮಯ್ಯ ಸರ್ಕಾರ ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿತ್ತು ಎಂದು ಆರೋಪಿಸಿದ್ದಾರೆ.
ಖರ್ಗೆಯವರೇ ಸ್ವತಃ ಇದು ಔಟ್ ಡೇಟೆಡ್ ವರದಿ ಅಂದಿದ್ದಾರೆ. ಈಗಲಾದರೂ ರಾಜ್ಯದ ಜಾತಿ ಜನಗಣತಿಗೆ ಇತಿಶ್ರೀ ಹಾಡಲಿ. ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ಸೃಷ್ಟಿಸಲು ಹೊರಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಳಿ ಕಾಂತರಾಜು ವರದಿಯ ಪ್ರತಿಯೇ ಇಲ್ಲ. ಜಯಪ್ರಕಾಶ್ ಹೆಗ್ಡೆ ಯಾವ ಆಧಾರದಲ್ಲಿ ವರದಿ ಕೊಟ್ರು ಹಾಗಾದ್ರೆ?
ಸಿದ್ದರಾಮಯ್ಯ ವರದಿಯಲ್ಲಿ ಸದುದ್ದೇಶವಂತೂ ಇಲ್ಲ. ಈಗಲಾದರೂ ಸಿದ್ದರಾಮಯ್ಯಗೆ ಭಗವಂತ ಬುದ್ಧಿ ಕೊಡಲಿ, ಕೇಂದ್ರದ ಪರ ಸಿದ್ದರಾಮಯ್ಯ ನಿಲ್ಲಲಿ ಎಂದು ಸಲಹೆ ನೀಡಿದ್ದಾರೆ.
ಮಂಗಳೂರು ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಮೇಶ್ವರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದರು. ಆಗಲೇ ಕಠಿಣ ಕ್ರಮ ಕೈಗೊಂಡಿದ್ದಿದ್ದರೆ, ಇಂತಹ ಘಟನೆ ಆಗುತ್ತಿರಲಿಲ್ಲ. ಕಾಂಗ್ರೆಸ್ ನ ಮುಸ್ಲಿಂರ ಓಲೈಕೆಯಿಂದಾಗಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.