ಬೆಂಗಳೂರು: ಎರಡು ದಿನಗಳಿಂದ ಸತತವಾಗಿ ಸುರಿದ ಮಳೆ ಇಂದು ಕೊಂಚ ರಿಲೀಫ್ ಪಡೆದಿದೆ. ಹೀಗಾಗಿ ಸಿಲಿಕಾನ್ ಸಿಟಿ ಮಂದಿ ನಿಟ್ಟುಸಿರು ಬಿಟ್ಟಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ರಾಜ್ಯಾದಾದ್ಯಂತ ಮೇ 24ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ ಕೊಡಗು, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಳೆಯಿಂದಾಗಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಮರಗಳು ಧರೆಗೆ ಉರುಳುತ್ತಿವೆ. ಬುಧವಾರ ಬೆಳಿಗ್ಗೆ ಹೊರಮಾವು ಬಳಿ ಬೃಹತ್ ಮರ ನೆಲಕ್ಕೆ ಉರುಳಿದೆ. ಮರ ಬಿದ್ದ ಹಿನ್ನೆಲೆ 2 ಕಾರು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಾಹನ ಸವಾರರು ಪರದಾಟ ನಡೆಸುವಂತಾಗಿದೆ.