ಬೆಂಗಳೂರು: ರಾಜ್ಯ ಸರ್ಕಾರವು ವಸತಿ ಯೋಜನೆಗಳಲ್ಲಿ (Housing Project) ಅಲ್ಪಸಂಖ್ಯಾತ ಸಮುದಾಯಕ್ಕೆ (Minority Community) ಶೇ. 15 ರಷ್ಟು ಮೀಸಲಾತಿ ನೀಡುವ ನಿರ್ಧಾರ ಕೈಗೊಂಡಿದ್ದು, ಮತ್ತೊಮ್ಮೆ ಮುಸ್ಲಿಂ ಓಲೈಕೆಗೆ ಮುಂದಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಷಯವಾಗಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದ್ದಾರೆ.
ವಸತಿ ಯೋಜನೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ. 15ರಷ್ಟು ಮೀಸಲಾತಿ ನೀಡುವುದ ಕೇಂದ್ರ ಸರ್ಕಾರದ ಸಾಚಾರ್ ಸಮಿತಿ ವರದಿಯಲ್ಲಿ ಇದೆ. ಹೀಗಾಗಿ ಕೇಂದ್ರ ಸರ್ಕಾರದ ಮಾದರಿಯಲ್ಲೇ ರಾಜ್ಯದಲ್ಲೂ ಮೀಸಲಾತಿಯ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಅಲ್ಲದೇ, ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಆಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು. ಅದನ್ನೇ ಈಗ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ನೇತೃತ್ವದ ಸರ್ಕಾರದ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೀಗಾಗಿ ಶೇ. 10ರಷ್ಟಿದ್ದ ಮೀಸಲಾತಿಯನ್ನು ಶೇ. 15ಕ್ಕೆ ಏರಿಸಲಾಗಿದೆ ಎಂದಿದ್ದಾರೆ.